ಇಡಿ ದಾಳಿ: ತನಿಖೆಯ ದಿಕ್ಕು ಕಾದು ನೋಡಬೇಕು– ಸತೀಶ ಜಾರಕಿಹೊಳಿ
ಇಡಿ ದಾಳಿ: ತನಿಖೆಯ ದಿಕ್ಕು ಕಾದು ನೋಡಬೇಕು– ಸತೀಶ ಜಾರಕಿಹೊಳಿ

ಬೆಳಗಾವಿ, ಜೂ. 26: ಅಬಕಾರಿ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿಯ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಲೋಕಾಯುಕ್ತದಂತಹ ಕಾನೂನುಬದ್ಧ ಸಂಸ್ಥೆಗಳಿವೆ. ಈ ಹಿಂದಿನ ಸಂಬಂಧಿತ ಪ್ರಕರಣವೊಂದನ್ನು ಹೈಕೋರ್ಟ್ ರದ್ದುಪಡಿಸಿತ್ತು. ನಂತರ ಹೊಸ ಪ್ರಕರಣ ದಾಖಲಾಗಿದೆಯೇ ಎಂಬ ಮಾಹಿತಿ ತಮ್ಮ ಬಳಿ ಇಲ್ಲ ಎಂದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಇಡಿ ದಾಳಿ ನಡೆದಿರುವುದು ಇದೇ ಮೊದಲ ಬಾರಿಗೆ. ತನಿಖೆ ಪೂರ್ಣಗೊಂಡ ಬಳಿಕವೇ ಸತ್ಯಾಂಶ ಹೊರಬರಲಿದೆ. ಈ ಹಂತದಲ್ಲಿ ಪ್ರಕರಣವನ್ನು ರಾಜಕೀಯ ಪ್ರೇರಿತ ಎಂದು ಹೇಳುವುದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದರು.
ವೈ. ಮಂಜುನಾಥ ಅವರು ಜಾರಕಿಹೊಳಿ ಕುಟುಂಬದ ಸಂಬಂಧಿಕರಾಗಿರುವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲ. ಕಾನೂನು ತನ್ನ ಪ್ರಕಾರ ಸಾಗಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನ ಜೊತೆಗೆ ಅಧ್ಯಕ್ಷ ಸ್ಥಾನ ನೀಡುವಂತೆ ಬೇಡಿಕೆ ಇತ್ತು. ಆದರೆ ‘ಒಬ್ಬರಿಗೆ ಒಂದೇ ಹುದ್ದೆ’ ನಿಯಮದ ಹಿನ್ನೆಲೆಯಲ್ಲಿ ಸಚಿವ ಸ್ಥಾನವನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
